ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಪತ್ರಕರ್ತ, ಅಕ್ಷರ ತೋರಣ ಪತ್ರಿಕೆ ಸಂಪಾದಕ ಪಿ. ರಾಜೇಶ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ ಕೃಷ್ಣಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ರಾಜ್ಯದ 50 ಮೂಲಬುಡಕಟ್ಟುಗಳ ಮುಖಂಡರು ಮತ್ತು ಸಂಘದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಾಲಿ ಆದಿವಾಸಿ ರಕ್ಷಣಾ ಪರಿಷತ್ನ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪಿ. ರಾಜೇಶ್ ರವರನ್ನು ಸರ್ವಾನುಮತದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಂಗೀಕರಿಸಲಾಯಿತು ಎಂದಿದ್ದಾರೆ.
ಕಳೆದ 6 ವರ್ಷಗಳಿಂದ ಆದಿವಾಸಿ ರಕ್ಷಣಾ ರಿಷತ್ ನ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆದಿವಾಸಿಗಳ ಪರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ರಾಜ್ಯ ಸಂಘಟನೆಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಶಕ್ತಿ ತುಂಬಿರುವುದನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜೇಶ್ ತನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡಿದ್ದು, ಈ ಹುದ್ದೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿರುವ ಆದಿವಾಸಿಗಳ ಪರವಾಗಿ ಧ್ವನಿಯಾಗಿ ಕೆಲಸ ಮಾಡಲು ಸರ್ವ ರೀತಿಯಲ್ಲಿಯೂ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.