ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಏನಿಲ್ಲ ಎಂದು ಬಿತ್ತಿ ಪತ್ರಗಳನ್ನು ಹಾಗೂ ಚೊಂಬು ಪ್ರದರ್ಶಿಸಿದ ಕಾರ್ಯಕರ್ತರು, ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಆಂಧ್ರ ಮತ್ತು ಬಿಹಾರಕ್ಕೆ ಸಿಂಹಪಾಲು ನೀಡಿ ಕರ್ನಾಟಕವನ್ನು ಕಡೆಗಣಿಸುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಆರೋಪಿಸಿದರು.
ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದರೂ ಸಹ ಇಲ್ಲಿಂದ ಆಯ್ಕೆಯಾಗಿ ಹೋದ ಬಿಜೆಪಿ ಸಂಸದರು ಯಾವುದೇ ಚಕಾರ ಎತ್ತಿಲ್ಲ ಎಂದು ದೂರಿದರು.
ನರೇಂದ್ರ ಮೋದಿಯವರ ಎದುರು ಬಾಯಿ ಬಿಡಲು ಸಂಸದರು ತಯಾರಿಲ್ಲ. ಬಿಜೆಪಿಯಿಂದ 17 ಮಂದಿ ಲೋಕಸಭಾ ಸದಸ್ಯರು ಆಯ್ಕೆಯಾಗಿದ್ದರೂ ಕರ್ನಾಟಕದ ಪರ ಮಾತನಾಡುವ ಕಾಳಜಿ ತೋರಿಸಿಲ್ಲ ಎಂದು ಆರೋಪಿಸಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿದ್ದರೂ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡುವ ಪ್ರಯತ್ನ ಮಾಡಿಲ್ಲ. ಅವರು ಇಲ್ಲಿ ರಾಜೀನಾಮೆ ನೀಡಿ ಬೇರೆ ರಾಜ್ಯದಿಂದ ಆಯ್ಕೆಯಾಗುವುದು ಒಳಿತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಬೇಡಿಕೆಗಳ ಬಗ್ಗೆ ಬಜೆಟ್ಗೆ ಮುನ್ನವೇ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಆದರೂ ಅದಕ್ಕೆ ಕೇಂದ್ರ ಸರ್ಕಾರದ ಸ್ಪಂದನೆ ಸಿಕ್ಕಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ರೂ. ಅನುದಾನ ಕೊಡುವುದಾಗಿ ಹೇಳಿ ಅದನ್ನು ಬಿಡುಗಡೆ ಮಾಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಕೇಂದ್ರಕ್ಕೆ ನಮ್ಮ ರಾಜ್ಯದ ರೈತರ ಬಗ್ಗೆ ಕಾಳಜಿ ಇಲ್ಲ. ಮೇಕೆದಾಟು ಯೋಜನೆಗೆ ಅನುಮಾನ ಅನುಮೋದನೆ ಕೊಟ್ಟಿಲ್ಲ. ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಟಿ.ರವಿ ಮತ್ತು ಎಸ್.ಎಲ್ ಬೋಜೇಗೌಡ ಅವರುಗಳು ಸದನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಯಾವುದೇ ಚರ್ಚೆ ನಡೆಸಲಿಲ್ಲ. ಅತೀವೃಷ್ಟಿಯಿಂದಾಗಿ ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಸೇತುವೆಗಳು ಉರುಳಿ ಬಿದ್ದಿವೆ. ರಸ್ತೆಗಳು ಹಾಳಾಗಿವೆ ಹೀಗಿದ್ದರೂ ವಿಧಾನಸೌಧದ ಬಳಿ ತಾಳಹಾಕಿ ನೃತ್ಯ ಮಾಡುತ್ತಾರೆ. ಸದನವನ್ನು ಹಾಳುಮಾಡಿದ್ದಷ್ಟೇ ಅವರ ಸಾಧನೆ ಎಂದು ದೂರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಕೆಪಿಸಿಸಿ ವಕ್ತಾರ ಹೆಚ್.ಎಚ್.ದೇವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಪ್ರಸಾದ್ ಅಮೀನ್ ಇತರರು ಭಾಗವಹಿಸಿದ್ದರು.