ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಗಸ್ಟ್ 17 ರಂದು 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ. ‘ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪ್ರತಿಭಟನಾನಿರತ ವೈದ್ಯರ ಮೇಲೆ ಗೂಂಡಾಗಿರಿ ಪ್ರದರ್ಶಿಸಲಾಯಿತು’. ವೈದ್ಯಕೀಯ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ‘ಆಗಸ್ಟ್ 17 ರಂದು ಬೆಳಿಗ್ಗೆ 6 ರಿಂದ ಆಗಸ್ಟ್ 18ರ ಬೆಳಿಗ್ಗೆ 6 ರವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಇನ್ಯಾವುದೇ ರೀತಿಯ ಚಿಕಿತ್ಸೆಗಳು ಲಭ್ಯವಿರುವುದಿಲ್ಲ.
‘ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕ್ರೂರ ಅಪರಾಧ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ ನಂತರ, ಭಾರತೀಯ ವೈದ್ಯಕೀಯ ಸಂಘವು ಶನಿವಾರ ಅಂದರೆ 17 ರಿಂದ ಆಗಸ್ಟ್ 18ರ ಭಾನುವಾರ ಬೆಳಗ್ಗೆ 6 ಗಂಟೆ ವರೆಗೆ ದೇಶಾದ್ಯಂತ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಎಲ್ಲಾ ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿತು. ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುವುದು. ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ ಮತ್ತು ಕೆಲ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ ಎಂದು ಐಎಂಎ ಪತ್ರಿಕಾ ಪ್ರಕಟಣೆ ತಿಳಿಸಿದೆ.