ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಅಂಗವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಿರುವ ಆಯೋಜಕರು, ಧಾರ್ಮಿಕ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಪೊಲೀಸ್ ಅಧೀಕ್ಷಕರವರ ಉಪಸ್ಥಿತಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು.
ಗಣೇಶ ವಿಗ್ರಹ ಪ್ರತಿಷ್ಟಾಪನೆ ಮಾಡುವ ಆಯೋಜಕರು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು, ಪರಿಸರ ಸ್ನೇಹಿ ವಿಗ್ರಹಗಳನ್ನು ಪ್ರತಿಪ್ಠಾಪಿಸಲು, ಸ್ವಯಂಸೇವಕರನ್ನು ನೇಮಿಸಿಕೊಳ್ಳಲು, ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಲು, ಪೆಂಡಾಲ್ ಸುರಕ್ಷತೆ ಮತ್ತು ಸಿಸಿ ಟಿವಿ ಕ್ಯಾಮರ ಅಳವಡಿಕೆ, ಏಕಗವಾಕ್ಷಿ ವ್ಯವಸ್ಥೆ ಹಾಗೂ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲು ಸೂಚನೆಗಳನ್ನು ನೀಡಲಾಯಿತು.
ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳನ್ನು ಜಿಲ್ಲೆಯಲ್ಲಿ ಶಾಂತಯುತವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿದ್ದ ಎಲ್ಲಾ ಅಧಿಕಾರಿಗಳಿಗೆ ಸೂಚನೆಗಳನ್ನು ಸಹ ನೀಡಲಾಯಿತು.
ಸಭೆಯಲ್ಲಿ ಅಧ್ಯಕ್ಷರು, ನಗರಸಭೆ; ಅಧ್ಯಕ್ಷರು, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ; ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯಿತಿ; ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿದಂತೆ ಪೊಲೀಸ್, ಕಂದಾಯ, ಅಗ್ನಿಶಾಮಕ, ಮೆಸ್ಕಾಂ, ಅರಣ್ಯ, ಮಾಲಿನ್ಯ ನಿಯಂತ್ರಣ ಮಂಡಳಿ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.