ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಬಿ.ಜೆ.ಪಿ.ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಶನಿವಾರ ಬೆಳಿಗ್ಗೆ ದೂರು ದಾಖಲಿಸಿದ್ದರು.
ದೂರು ದಾಖಲಾಗುತ್ತಿದ್ದಂತೆ ಪೊಲೀಸರಿಂದ ಮುನಿರತ್ನ ತಲೆಮರೆಸಿಕೊಂಡು ಬೆಂಗಳೂರಿನಲ್ಲೇ ಓಡಾಡುತ್ತಿದ್ದರು. ಪೊಲೀಸರಿಂದ ಯಾವುದೇ ಕ್ರಮವಾಗದಿದ್ದಾಗ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದುಮನವಿ ಮಾಡಿದ್ದರು.
ಮುನಿರತ್ನ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಶಾಸಕನ ಬಂಧಿಸಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದಾರೆ. ಬಳಿಕ ಮುನಿರತ್ನರನ್ನು ನ್ಯಾಯಾಧೀಶರ ಮುಂದೆ ಹಾಜರ್ ಪಡಿಸುವ ಸಾಧ್ಯತೆ ಇದೆ.
ಒಂದು ವೇಳೆ ಇಂದು ನ್ಯಾಯಾಧೀಶರ ಮುಂದೆ ಹಾಜರ್ ಪಡಿಸದಿದ್ದರೆ ನಾಳೆ ಸಂಜೆಯ ತನಕ ಸಮಯ ಇದೆ. ಭಾನುವಾರ ನ್ಯಾಯಾಧೀಶರ ಮನೆಗೆ ಹಾಜರ್ ಪಡಿಸಬಹುದು. ಸೋಮವಾರ ಈದ್ ಮೀಲಾದ್ ಹಿನ್ನೆಲೆ ಮಂಗಳವಾರ ಕೂಡ ಕೋರ್ಟ್ಗೆ ಹಾಜರ್ ಪಡಿಸಬಹುದು.
ಈ ಪ್ರಕರಣದಿಂದ ಬಿಜೆಪಿ ಪಕ್ಷ ತೀವ್ರ ಮುಜುಗರಕ್ಕೆ ಒಳಗಾಗಿದೆ. ಮುನಿರತ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೇಸ್ ಪಕ್ಷದವರು ಒತ್ತಾಯಿಸಿದ್ದಾರೆ