ಸಮಾಜ ಪರಿವರ್ತನೆ ಹಾಗೂ ಉನ್ನತ ಸ್ಥಿತಿಯಲ್ಲಿ ಸಾಗಲು ಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿಶ್ವನಾಥ್ ಹೇಳಿದರು.
ಅವರು ಶನಿವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಘಟನೆ ವತಿಯಿಂದ ಏರ್ಪಡಿಸಿದ್ದ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯಿದೆ ಪರಿಣಾಮಕಾರಿ ಅನುಷ್ಠಾನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರು ಎಲ್ಲಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಸಮಾಜದ ಸ್ಥಿತಿ ಉತ್ತಮವಾಗಿದೆ. ಕಾರ್ಮಿಕರಿಗೆ ಗೌರವ, ರಕ್ಷಣೆ ದೊರಕಬೇಕು. ಈ ನಿಟ್ಟಿನಲ್ಲಿ ಕಾರ್ಮಿಕರು ಸಾಮಾನ್ಯ ಜ್ಞಾನ ಹಾಗೂ ಕಾನೂನಿನ ಬಗ್ಗೆ ಅರಿತುಕೊಳ್ಳಬೇಕೆಂದು ಸಲಹೆ ನೀಡಿದರು.
ತಾ.ಪಂ. ಇಒ ದಯಾವತಿ ಮಾತನಾಡಿ, ಸರಕಾರ ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕರಿಗಾಗಿ ವಿವಿಧ ಯೀಜನೆಗಳನ್ನು ಜಾರಿಗೊಳಿಸಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸರಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜತೆಗೆ ಇತರೇ ಕಾರ್ಮಿಕರಿಗೆ ಅರಿವು ಮೂಡಿಸಬೇಕೆಂದು ಹೇಳಿದರು.
ವಕೀಲರ ಸಂಘಸ ಅಧ್ಯಕ್ಷ ಬಿ.ಟಿ.ನಟರಾಜ್ ಮಾತನಾಡಿ, ತಮ್ಮ ಕೌಶಲ್ಯದ ಮೇರೆಗೆ ವೇತನ ಸಿಗುತ್ತಿರುವುದರಿಂದ ಶಿಕ್ಷಣ ಪಡೆದ ಎಷ್ಟೋ ಮಂದಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರು ತಮ್ಮ ಜೀವನ ಭದ್ರತೆ ಮಾಡಿಕೊಳ್ಳಲು ಹಾಗೂ ಸರಕಾರದ ಸವಲತ್ತು ಪಡೆಯಲು ಮುಖ್ಯವಾಗಿ ತಾವು ಓದಿದ ಶಾಲೆ, ಹೆಸರು, ಗ್ರಾಮ, ಜನನ ಸೇರಿದಂತೆ ಎಲ್ಲಾ ದಾಖಲೆಗಳನ್ನು ಸರಿಪಡಿಸಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್.ರವಿಕುಮಾರ್ ವಹಿಸಿ, ಕಾರ್ಮಿಕರಿಗಾಗಿ ಸರಕಾರ ರೂಪಿಸಿರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ವಕೀಲರ ಸಂಘದ ಜಂಟಿ ಕಾರ್ಯದರ್ಶಿ ರಿಜ್ವಾನ್, ಪಿಎಸ್ಐ ಶ್ರೀನಾಥ್ರೆಡ್ಡಿ, ಚಿಕ್ಕಮಗಳೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್, ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್ ಮತ್ತಿತರರಿದ್ದರು.