ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬಣಕಲ್ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತರುವೆ ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಸತೀಶ್ ಅವರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರು ಆಸಕ್ತಿಗೆ ತಕ್ಕಂತೇ ಪ್ರೋತ್ಸಾಹ ನೀಡುವ ಅಗತ್ಯವಿದೆ, ಮಕ್ಕಳು ಸಮಾಜಮುಖಿಯಾಗಿ ಬೆಳೆಯುವ ಅಗತ್ಯವಿದೆ. ಸಮಾಜಮುಖಿಯಾಗಿ ಬೆಳೆದಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕಿದೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ಡಿ.ವಿ. ಸಂಜಯಗೌಡ ಮಾತನಾಡಿ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳು ಮಕ್ಕಳ ಕಲಿಕಾ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಇಂತಹ ವೇದಿಕೆಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವ ಅಗತ್ಯವಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಮಾನವಾಗಿ ತೊಡಗಿಸಿಕೊಳ್ಳಬೇಕಿದೆ ಎಂದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಕೊಟ್ಟಿಗೆಹಾರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. 13 ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ಎಂ ಭರತ್, ಮುಖ್ಯ ಶಿಕ್ಷಕಿ ಪ್ರಭಾವತಿ, ಎಸ್ಡಿಎಂಸಿ ಸದಸ್ಯರಾದ ರಮೇಶ್, ಕಾಂತರಾಜ್, ಶಿಕ್ಷಕರಾದ ಸೌಮ್ಯ, ಶೀನಾ ಸುಲ್ತಾನ್, ಹಂಸಲೇಖ, ಮರಳಸಿದ್ದಪ್ಪ, ಸೌಮ್ಯ, ಕಮಲ, ಜ್ಞಾನೇಶ್ವರಿ, ಛಾಯಾ ಮುಂತಾದವರು ಇದ್ದರು.