ರೈತಾಪಿ ವರ್ಗದವರಿಗೆ ಅನುಕೂಲವಾಗುವ ಹಲವು ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಚಿಕ್ಕಮಗಳೂರಿನಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕರ್ನಾಟಕ ಬೆಳೆಗಾರರ ಒಕ್ಕೂಟ, ಕೆ.ಪಿ.ಎ ಮತ್ತು ಉಪಾಸಿ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ನಗರದ ಎ.ಐ.ಟಿ. ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಶೋಕ್ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.
ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಆರ್. ಅಶೋಕ್ ರಾಜ್ಯದಲ್ಲಿ ಭೂಕಬಳಿಕೆ ಕಾಯ್ದೆಯಿಂದ ಗ್ರಾಮೀಣ ಪ್ರದೇಶದ ರೈತರನ್ನು ಹೊರಗಿಡಲಾಗಿದೆ. ಮಲೆನಾಡು ಭಾಗದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವ ಬೆಳೆಗಾರರಿಗೆ ಪ್ರತಿಕುಟುಂಬಕ್ಕೆ ಗರಿಷ್ಟ 25 ಎಕರೆ ಪ್ರದೇಶವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಕಾಯ್ದೆ ರೂಪಿಸಲಾಗಿದೆ. ಸರ್ಕಾರಿ ಭೂಮಿ ಗುತ್ತಿಗೆ ಕಾಯ್ದೆ ಜಾರಿಗೆ ತರಲು ಸಾಕಷ್ಟು ಪ್ರತಿರೋಧ ವ್ಯಕ್ತವಾಗಿತ್ತು. ಆದರೆ ಎಲ್ಲಾ ವಿರೋಧಗಳನ್ನು ಎದುರಿಸಿ ರೈತರಿಗೆ ಅನುಕೂಲವಾಗಬೇಕು ಎಂದ ಉದ್ದೇಶದಿಂದ ಕಾಯ್ದೆ ಸದನದಲ್ಲಿ ಅನುಮೋದನೆ ಆಗುವಂತೆ ಮುತುವರ್ಜಿ ವಹಿಸಿ ಬೆಳೆಗಾರರಿಗೆ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ ಎಂದರು.
ಸಮಾರಂಭದಲ್ಲಿ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಸ್, ಶಾಸಕರಾದ ಸಿ.ಟಿ.ರವಿ, ಎಂ.ಪಿ.ಕುಮಾರಸ್ವಾಮಿ, ಬೆಳ್ಳಿಪ್ರಕಾಶ್, ಟಿ.ಡಿ.ರಾಜೇಗೌಡ, ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಕೆ.ಜಿ.ಎಫ್, ಕೆ.ಪಿ.ಎ, ಉಪಾಸಿ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ತಾಲ್ಲೂಕು ಮತ್ತು ಹೋಬಳಿ ಬೆಳೆಗಾರರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ರೈತ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.