ಮೂಡಿಗೆರೆ ತಾಲ್ಲೂಕು ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಅಜಿತ್ ಎಂಬ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಘಟನೆಯ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಯುವಕ ಅಜಿತ್ ನಾನು ಹಿಂದೂ ಸಂಘಟನೆ ಕಾರ್ಯಕರ್ತನೆಂದು ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ನನ್ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೆ ನೀಡಿರುತ್ತಾನೆ. ಹಂಝ, ಹಿದ್ದು, ಉಬೇದ್, ರಶೀದ್, ಸುಹೇಬ್ ಎಂಬುವವರು ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ.
ಅಜಿತ್ ಮೇಲೆ ಹಲ್ಲೆಯಾಗಿರುವ ಸುದ್ದಿ ಎಲ್ಲೆಡೆ ಹರಡಿ ಬಣಕಲ್ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಬಣಕಲ್ ಮತ್ತು ಮೂಡಿಗೆರೆಗೆ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು.
ಮಧ್ಯಾಹ್ನದ ನಂತರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಣಕಲ್ ಇಂದಿರಾನಗರದ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರ ಮನೆಯಲ್ಲಿ ಅಜಿತ್ ಯುವಕರ ಕೈಗೆ ಸಿಕ್ಕಿಬಿದ್ದಿದ್ದು, ಮನೆಯ ಕಬೋಡ್ ಒಳಗೆ ಅಡಗಿ ಕುಳಿತಿದ್ದ ಅಜಿತ್ ನನ್ನು ಯುವಕರ ತಂಡ ಕೆಳಗಿಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಮುಸ್ಲಿಂ ಯುವಕರ ತಂಡವೊಂದು ಅಜಿತ್ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ನಡುವೆ ಆ ಮಹಿಳೆ ಅಜಿತ್ ವಿರುದ್ಧವೇ ಠಾಣೆಗೆ ದೂರು ನೀಡಿದ್ದು, ಅಜಿತ್ ನನ್ನ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.
ಅಜಿತ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಪ್ರಕರಣವೀಗ ರಾಜಕೀಯ ಬಣ್ಣ ಪಡೆದುಕೊಳ್ಳತೊಡಗಿದೆ.
ಪ್ರಕರಣದ ಬಗ್ಗೆ ಪೊಲೀಸರು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.