ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಅಧಿಕಾರಿ ಮಂಜುನಾಥಗೌಡ(40 ವರ್ಷ) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಹಾಸನ ಸಮೀಪದ ಮದ್ದೂರು ಹೊಸಳ್ಳಿ ಗ್ರಾಮದ ಮಂಜುನಾಥಗೌಡ 2007ನೇ ಸಾಲಿನ ಪೊಲೀಸ್ ಅಧಿಕಾರಿ. ಇವರು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿ, ಪ್ರಸ್ತುತ ಬೆಂಗಳೂರಿನ ಜಯನಗರ ಠಾಣೆಯಲ್ಲಿ ವೃತ್ತನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಒಂದೂವರೆ ತಿಂಗಳ ಹಿಂದೆ ದಿಡೀರ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಂಜುನಾಥಗೌಡ ಅವರಿಗೆ ಲಿವರ್ ಕ್ಯಾನ್ಸರ್ ಆಗಿರುವುದು ಪತ್ತೆಯಾಗಿತ್ತು ಎನ್ನಲಾಗಿದೆ. ಅನಾರೋಗ್ಯದ ನಡುವೆಯೂ ಕಾರ್ಯನಿರ್ವಹಿಸುತ್ತಿದ್ದ ಇವರು ಒಂದು ವಾರದ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಈ ಹಿಂದೆ ನೆಲಮಂಗಲ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆಯಲ್ಲಿ ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದರು. ಮಂಜೇಗೌಡ ಎಂದರೆ ಇಡೀ ನೆಲಮಂಗಲ ಭಾಗದ ಕ್ರಿಮಿನಲ್ ಗಳು ನಡುಗುತ್ತಿದ್ದರು. ಮಂಜುನಾಥಗೌಡ ಅವರು ತಾವು ಕಾರ್ಯನಿರ್ವಹಿಸಿದ ಎಲ್ಲಾ ಕಡೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ದಕ್ಷತೆ ಮತ್ತು ಕಾಳಜಿಯಿಂದ ಕೆಲಸ ಮಾಡಿ ಹೆಸರು ಗಳಿಸಿದ್ದರು. ಹಾಸನ ಲೋಕಾಯುಕ್ತ ಇಲಾಖೆಯಲ್ಲಿ ಒಂದೂವರೆ ವರ್ಷ ಕಾರ್ಯನಿರ್ವಹಿಸಿದ್ದರು.
ಅವರು ತಮ್ಮ ಕಾರ್ಯನಿರ್ವಹಣೆಗೆ ಮಂಜುನಾಥಗೌಡ ಅವರು 2021 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕ ಪಡೆದಿದ್ದರು.
ಮಂಜುನಾಥಗೌಡ ಅವರ ಪತ್ನಿ ಶಿಲ್ಪಾ ಅವರು ಸಹ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಹಾಸನ ಎ.ಸಿ.ಬಿ.ಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಇತ್ತೀಚೆಗಷ್ಟೇ ಹಾಸನದಲ್ಲಿ ನೂತನ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿದ್ದರು ಎಂದು ತಿಳಿದುಬಂದಿದೆ.
ಇಲಾಖೆಯಲ್ಲಿ ಉತ್ತಮ ಹೆಸರು ಮಾಡಿದ್ದ ಮತ್ತು ಜನಸಾಮಾನ್ಯರ ಬಗ್ಗೆ ವಿಶೇಷ ಮುತುವರ್ಜಿ ವಹಿಸುತ್ತಿದ್ದ, ಸ್ನೇಹಿಜೀವಿಯಾಗಿದ್ದ ಮಂಜುನಾಥಗೌಡ ಅವರ ಅಕಾಲಿಕ ನಿಧನಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು, ಬಂಧುಗಳು, ಸ್ನೇಹಿತರು ತೀವ್ರ ಕಂಬನಿ ಮಿಡಿದಿದ್ದಾರೆ.