ಕನ್ನಡದ ಖ್ಯಾತ ನಟ ನಿರ್ದೇಶಕ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವವರು ನೀಡಿದ ದೂರಿನನ್ವಯ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಿಸಲಾಗಿದೆ.
ಪರಿಶಿಷ್ಠ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉಪೇಂದ್ರ ಸಾಮಾಜಿಕ ಜಾಲತಾಣವೊಂದರಲ್ಲಿ ಮಾತನಾಡುತ್ತಾ “ಊರು ಎಂದ ಮೇಲೆ ಹೊಲಗೇರಿ ಇರುತ್ತದೆ” ಎಂಬ ಮಾತುಗಳನ್ನು ಆಡಿದ್ದರು. ಇದು ದಲಿತ ಸಮುದಾಯದ ಭಾವನೆಗಳಿಗೆ ಘಾಸಿ ಉಂಟುಮಾಡಿದೆ, ಆದ್ದರಿಂದ ಉಪೇಂದ್ರ ವಿರುದ್ಧ ದಲಿತ ದೌರ್ಜನ್ಯ ವಿರೋಧಿ ಕಾಯ್ದೆಯಡಿಯಲ್ಲಿ ದೂರು ದಾಖಲಿಸುವಂತೆ ಮಧುಸೂದನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಉಪೇಂದ್ರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಪೇಂದ್ರ ಅವರ ಈ ಹೇಳಿಕೆಗೆ ರಾಜ್ಯದಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ತದನಂತರ ಉಪೇಂದ್ರ ಅವರು ತಮ್ಮ ಮಾತಿಗೆ ಕ್ಷಮೆ ಕೋರಿದ್ದಾರೆ.