ಕಳ್ಳತನ ಸೇರಿದಂತೆ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಕಳ್ಳತನ, ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಎಸ್ಪಿ ಉಮಾಪ್ರಶಾಂತ್ ಅವರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಗ್ರಾಮ ಗ್ರಾಮಗಳಿಗೆ ತೆರಳಿ ಜನರಲ್ಲಿ ಜಾಗೃತಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಅದರಂತೆ ಇತ್ತೀಚೆಗೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಪೊಲೀಸರು ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದಾರೆ.
ಈ ಬಗ್ಗೆ ಬಾಳೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಎಚ್.ಎಸ್.ನಂದೀಶ್ ಅವರು ಕೊಟ್ಟಿಗೆಹಾರದಲ್ಲಿ ನಡೆದ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ’ ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಕಳ್ಳತನ ತಡೆಯಲು ಕೆಲವು ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಕೆಲವು ನಿಯಮಗಳನ್ನು ಪಾಲಿಸಬೇಕು. ಪ್ರಮುಖವಾಗಿ
* ಮಹಿಳೆಯರು ಚಿನ್ನಾಭರಣಗಳನ್ನು ಹೆಚ್ಚಾಗಿ ಧರಿಸಿ ಪ್ರದರ್ಶಿಸಬೇಡಿ. ಕಳ್ಳಕಾಕರು ಯಾವುದೇ ಚಿನ್ನಾಭರಣಕ್ಕಾಗಿ ಕಿತ್ತುಕೊಳ್ಳಲು ಅವಕಾಶ ಕೊಡಬೇಡಿ,
* ದ್ವಿಚಕ್ರ ವಾಹನ ಅಥವಾ ಕಾರುಗಳನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಬೇಕು.ಹ್ಯಾಂಡ್ ಲಾಕ್ ಮಾಡಿ ಕಳ್ಳತನ ತಡೆಗಟ್ಟಬಹುದು.
* ಗುಮಾನಿ ವ್ಯಕ್ತಿಗಳ ಬಗ್ಗೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು.
*ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ,ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ತಳ್ಳುವುದು,ಬಾಲ್ಯ ವಿವಾಹದಂತಹ ಅಪರಾಧ ತಡೆಯಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು.
*ಮನೆಯ ಸಮೀಪ ಬಂದು ನೀರು ಹಾಗೂ ವಿಳಾಸ ಕೇಳುವ ನೆಪದಲ್ಲಿ ಬರುವ ಮತ್ತು ಪೊಲೀಸರ ಸೋಗಿನಲ್ಲಿ ಬರುವ ವ್ಯಕ್ತಿಗಳೊಂದಿಗೆ ಜಾಗೃತವಾಗಿರುವುದು ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯವಾಗಿದೆ.
*ಮನೆ ಮತ್ತು ಅಂಗಡಿಗಳಿಗೆ ಹೆಚ್ಚಿನ ಭದ್ರತೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಂಡು ಜಾಗೃತರಾಗಿರಬೇಕು
ಎಂದು ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅಶೋಕ್ ಗ್ರಾಮಸ್ಥರಾದ ಟಿ.ಎ.ಖಾದರ್, ಟಿ.ಎಂ.ನರೇಂದ್ರ, ಲಿಂಗರಾಜ್, ಮುನೀರ್,ಪ್ರಸಾದ್ ಶೆಟ್ಟಿ, ಅಬ್ದುಲ್ ರೆಹಮಾನ್,ಸವಿನ್,ಎ.ಎಸ್.ನಾಗೇಶ್, ಸುರೇಶ್ ಹಾಗೂ ಆಟೋ ಸಂಘದ ಸದಸ್ಯರು ಇದ್ದರು.
ಕಾಣೆಯಾಗಿದ್ದ ಕಾಫಿ ಎಸ್ಟೇಟ್ ಮ್ಯಾನೆಜರ್ ಕೆರೆಯಲ್ಲಿ ಶವವಾಗಿ ಪತ್ತೆ : ಎರಡು ದಿನದ ಹಿಂದೆ ಕಾಣೆಯಾಗಿದ್ದ ಕಾಶಿ ಬೋಪಯ್ಯ