ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ಕಾಂತರಾಜ್ ವರದಿಯನ್ನು ಸ್ವೀಕರಿಸಿ ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಬೇಕೆಂದು ಆಗ್ರಹಿಸಿ ನಗರದ ಆಝಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಗೌಸ್ ಮುನೀರ್ ರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಕಾಂತರಾಜ್ ವರದಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು ಆದರೆ ಅಧಿಕಾರಕ್ಕೆ ಬಂದು ನೂರು ದಿನ ಕಳೆದರು ಜಾರಿಗೆ ತರದೇ ಇರುವುದು ಖಂಡನೀಯ ಹಾಗೂ ಮುಸಲ್ಮಾನರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಿ ಈ ಮೂಲಕ ಚುನಾವಣೆಗು ಮುನ್ನ ಅಲ್ಪಸಂಖ್ಯಾತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸ ಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮೀಲ್ ಖಾನ್ ಮಾತನಾಡಿ ಸಾಮಾಜಿಕ ನ್ಯಾಯ ಮತ್ತು ಎಲ್ಲಾ ವರ್ಗಗಳ ಕ್ಷೇಮಾಭಿವೃದ್ಧಿ ಸದುದ್ದೇಶ ಹೊಂದಿರುವ ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೆ ತರುವ ಭರವಸೆ ನೀಡಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಯಿಂದ ನುಣುಚಿಕೊಳ್ಳುವ ಹುನ್ನಾರ ಮಾಡುತ್ತಿದೆ ಎಂದು ದೂರಿದರು.
ಸರ್ಕಾರ ಎಚ್ಚೆತ್ತುಕೊಂಡು ಭರವಸೆ ಈಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ನೀಡಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ.ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯರಾದ ಸಂಶುದ್ದೀನ್, ಕಡೂರು ವಿಧಾನಸಭಾ ಅಧ್ಯಕ್ಷರಾದ ಸಲ್ಮಾನ್, ಮುಸ್ಲಿಂ ಧರ್ಮ ಗುರುಗಳಾದ ಮೌಲಾನ ಯೂನುಸ್, ಖಾರಿ ಶಾಹೀದ್, ಮೂಡಿಗೆರೆ ಕ್ಷೇತ್ರ ಸಮಿತಿ ಸದಸ್ಯ ಹನೀಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.